ಶ್ರೀ ಸಿದ್ಧಾರೂಢ ಮಹಾಸ್ವಾಮೀಜಿಯವರ ಅಂಚೆ ಚೀಟಿ ಬಿಡುಗಡೆ
ಹುಬ್ಬಳ್ಳಿ: ಇಂದು ಶ್ರೀ ಸಿದ್ಧಾರೂಢರ ಅಂಚೆ ಚೀಟಿ ಬಿಡುಗಡೆಯಿಂದ ಅವರ ಜೀವನ ಚರಿತ್ರೆಯನ್ನು ನೆನಪಿಸಲು ಸಹಾಯಕವಾಗಲಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ನಾಗರೀಕ ಸರಬರಾಜು ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಪ್ರಹ್ಲಾದ್ ಜೋಶಿ ಹೇಳಿದರು.
ಇಂದು ಶ್ರೀ ಸಿದ್ದಾರೂಢ ಮಠದ ಆವರಣದಲ್ಲಿ ಭಾರತ ಸರ್ಕಾರದ ಸಂವಹನ ಸಚಿವಾಲಯದ ಅಂಚೆ ಇಲಾಖೆ ಮತ್ತು ಶ್ರೀ ಸಿದ್ಧಾರೂಢ ಸ್ವಾಮೀಜಿಯವರ ಮಠ ಟ್ರಸ್ಟ್ ಕಮೀಟಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶ್ರೀ ಸಿದ್ಧಾರೂಢ ಮಹಾಸ್ವಾಮೀಜಿಯವರ ಅಂಚೆ ಚೀಟಿ ಬಿಡುಗಡೆ ಸಮಾರಂಭವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಸಿದ್ಧಾರೂಢರು ನಡೆದಾಡಿದ ಪವಿತ್ರ ಭೂಮಿಯಲ್ಲಿ ಇಂದು ಅಂಚೆ ಚೀಟಿ ಬಿಡುಗಡೆ ಮಾಡಲಾಗಿದೆ. ಯಾವುದೇ ಒಂದು ಊರಿಗೆ ಅಲ್ಲಿನ ಸಂತರಿಂದ ಹೆಸರು ಬರುತ್ತದೆ. ಸಿದ್ಧಾರೂಢರ ಭಕ್ತರು ದೇಶದಾದ್ಯಂತ ಇದ್ದಾರೆ. ಹುಬ್ಬಳ್ಳಿಯ ಸಿದ್ಧಾರೂಢ ಮಠ ಪುಣ್ಯಕ್ಷೇತ್ರವಾಗಿ ಬೆಳೆದಿದೆ ಎಂದರು.
ಇಂಚಲದ ಸಾಧು ಸಂಸ್ಥಾನ ಮಠದ ಡಾ.ಶಿವಾನಂದ ಭಾರತಿ ಮಹಾಸ್ವಾಮೀಜಿ, ಮಹಾಲಿಂಗಪೂರದ ಸಿದ್ಧಾರೂಢ ದರ್ಶನ ಮಠದ ಸಹಜಾನಂದ ಮಹಾಸ್ವಾಮೀಜಿ, ಅಣ್ಣಿಗೇರಿ ದಾಸೋಹ ಮಠದ ಶ್ರೀ ಶಿವಕುಮಾರ ಮಹಾಸ್ವಾಮೀಜಿ, ರಮಾನಂದ ಸ್ವಾಮೀಜಿ, ಆತ್ಮಾನಂದ ಸ್ವಾಮೀಜಿ ಅವರು ಸಾನ್ನಿದ್ಯ ವಹಿಸಿದ್ದರು.
ಇದೇ ಸಂದರ್ಭದಲ್ಲಿ ಶ್ರೀ ಸಿದ್ಧಾರೂಢ ಸ್ವಾಮೀಜಿಯವರ ಅಂಚೆ ಚೀಟಿಯನ್ನು ಬಿಡುಗಡೆಗೊಳಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸದರಾದ ಬಸವರಾಜ ಬೊಮ್ಮಾಯಿ, ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ್, ಶಾಸಕರಾದ ಪ್ರಸಾದ್ ಅಬ್ಬಯ್ಯ, ಅರವಿಂದ ಬೆಲ್ಲದ್, ಮಹೇಶ ಟೆಂಗಿನಕಾಯಿ, ಎನ್.ಎಚ್.ಕೋನರೆಡ್ಡಿ, ಎಂ.ಆರ್.ಪಾಟೀಲ, ಮಹಾ ಪೌರರಾದ ರಾಮಣ್ಣ ಬಡಿಗೇರ, ಮಹಾಪೌರರಾದ ದುರ್ಗಮ್ಮ ಬಿಜವಾಡ, ಪಾಲಿಕೆ ಸದಸ್ಯೆ ಮಂಗಳಾ ಗೌರಿ, ಕರ್ನಾಟಕ ವಲಯದ ಚೀಪ್ ಪೋಸ್ಟ್ ಮಾಸ್ಟರ್ ಜನರಲ್ ಎಸ್.ರಾಜೇಂದ್ರಕುಮಾರ, ಡಿ.ಆರ್.ಪಾಟೀಲ, ಬಿ.ಆರ್.ಬಾಗೇವಾಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.